ಇತರೆ

“ನನ್ನ ಕುಟುಂಬದ ಮೇಲೆ ಮಾನಹಾನಿ ಮಾಡಲಾಗುತ್ತಿದೆ’ – ನ್ಯಾಯಾಲಯದ ಮೊರೆ ಹೋದ ನಿತಿನ್ ಗಡ್ಕರಿ

ಮುಂಬೈ:
E20 ಎಥೆನಾಲ್ ಮಿಶ್ರಿತ ಪೆಟ್ರೋಲ್ ಯೋಜನೆಗೆ ಸಂಬಂಧಿಸಿದಂತೆ ತಮ್ಮ ಹಾಗೂ ತಮ್ಮ ಕುಟುಂಬದ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ಆರೋಪಗಳನ್ನು ಪ್ರಶ್ನಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ‘E20’ ಯೋಜನೆಯಿಂದ ತಾವು ಹಾಗೂ ತಮ್ಮ ಕುಟುಂಬ ಲಾಭ ಪಡೆಯುತ್ತಿದ್ದಾರೆ ಎಂಬ ಆರೋಪಗಳೊಂದಿಗೆ ವಿವಾದಾತ್ಮಕ ಪೋಸ್ಟ್‌ಗಳು, ಡೀಪ್‌ಫೇಕ್ ಚಿತ್ರಗಳು ಹಾಗೂ ವೀಡಿಯೊಗಳು ಹರಡಲಾಗುತ್ತಿವೆ ಎಂದು ಗಡ್ಕರಿ ತಮ್ಮ ಅರ್ಜಿಯಲ್ಲಿ ತಿಳಿಸಿದ್ದಾರೆ. ಎಥೆನಾಲ್ ಮಿಶ್ರಣ ನೀತಿಯನ್ನು ಪೆಟ್ರೋಲಿಯಂ ಸಚಿವಾಲಯವೇ ನಿರ್ವಹಿಸುತ್ತಿದ್ದು, ಇದರಲ್ಲಿ ತಮ್ಮ ಕುಟುಂಬಕ್ಕೆ ಯಾವುದೇ ರೀತಿಯ ಪ್ರಯೋಜನವಿಲ್ಲ ಎಂಬುದು ಆಧಾರರಹಿತ ಆರೋಪ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣವು ವಾಹನಗಳ ಕಾರ್ಯಕ್ಷಮತೆಯನ್ನು ಹಾನಿಗೊಳಿಸುತ್ತಿದೆ ಎಂಬ ಆರೋಪಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡ್ಕರಿ ಈ ಕಾನೂನು ಕ್ರಮ ಕೈಗೊಂಡಿದ್ದಾರೆ.

ಇನ್ನೊಂದೆಡೆ, ತಮ್ಮ ವಿರುದ್ಧ ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡಲು ಅವಕಾಶ ನೀಡಿದ ಆರೋಪದ ಮೇಲೆ ಮೆಟಾ ಮತ್ತು ಗೂಗಲ್ ಸೇರಿದಂತೆ ಸಾಮಾಜಿಕ ಮಾಧ್ಯಮ ಸಂಸ್ಥೆಗಳ ವಿರುದ್ಧ ಸಿವಿಲ್ ಮೊಕದ್ದಮೆ ಹೂಡಲು ಬಾಂಬೆ ಹೈಕೋರ್ಟ್ ಗಡ್ಕರಿಗೆ ಅನುಮತಿ ನೀಡಿದೆ.

ಈ ನಡುವೆ, ಕೇಂದ್ರ ಸರ್ಕಾರದ E20 ಯೋಜನೆ ಕುರಿತು ಸುಳ್ಳು ಮಾಹಿತಿ ಹರಡಿದ ಆರೋಪದ ಮೇಲೆ ನಾಲ್ವರು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ನಾಗ್ಪುರದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ.

m